Humans or demons?
9
—
13
9
ಏನು ಭೈರವಲೀಲೆಯೀ ವಿಶ್ವವಿಭ್ರಮಣೆ ।
ಏನು ಭೂತಗ್ರಾಮನರ್ತನೊನ್ಮಾದ ॥
ಏನಗ್ನಿ ಗೋಳಗಳು! ಏನಂತರಾಳಗಳು! ।
ಏನು ವಿಸ್ಮಯ ಸೃಷ್ಟಿ! - ಮಂಕುತಿಮ್ಮ ॥ ೯ ॥
ಏನಿದು ಭೈರವ ಲೀಲೆ. ಏನಿದು ಇಡೀ ವಿಶ್ವದ ಸುತ್ತಾಟ. ಏನಿದು ಪಂಚ ಮಹಾ ಭೂತಗಳ ಮತ್ತು ಆ ಭೂತಗಳ ವಾಸಸ್ಥಳವಾದ ಆ ಮಹಾ ಚೈತನ್ಯ ಮತ್ತು ಮತ್ತು ಆ ಚೈತನ್ಯದ ಉನ್ಮಾದಭರಿತ ನರ್ತನ. ಏನಿದು ಅಗ್ನಿ ಗೋಳಗಳು ಈ ಸೃಷ್ಟಿಯ ಅಂತರಾಳ. ಆಹಾ ಎಂತಹ ಈ ವಿಸ್ಮಯ ಈ ಸೃಷ್ಟಿ. ಇದು ಈ ಕಗ್ಗದ ಅಂತರ್ಯದ ಭಾವ.
This whole world is under a frightful illusion - just like the intoxication of fair where people worship their village diety. Dances, trances, balls of fire, deep introspection by some. This creation is filled so much wonder! - Mankutimma
10
ಏನು ಪ್ರಪಂಚವಿದು! ಏನು ಧಾಳಾಧಾಳಿ!।
ಏನದ್ಭುತಾಪಾರಶಕ್ತಿನಿರ್ಘಾತ! ॥
ಮಾನವನ ಗುರಿಯೇನು? ಬೆಲೆಯೇನು? ಮುಗಿವೇನು?।
ಏನರ್ಥವಿದಕೆಲ್ಲ?- ಮಂಕುತಿಮ್ಮ ॥ ೧೦ ॥
ಇಲ್ಲಿಯವರೆಗೆ ಬಂದ ೯ ಕಗ್ಗಗಳಲ್ಲಿ, ಮೊದಲ ಮೂರು ಕಗ್ಗಗಳಲಿ, ಶ್ರೀ ಗುಂಡಪ್ಪನವರು, ಆ ಪರಮಾತ್ಮನೆಂದೆನಿಸಿಕೊಂಡ, ಪರಮಶಕ್ತಿಗೆ ನಮಿಸುತ್ತಾ, ಮುಂದಿನ ಕಗ್ಗಗಳಲ್ಲಿಮನುಷ್ಯನ ಜೀವನದ ಮತ್ತು ಸೃಷ್ಟಿಯ ವಿಚಿತ್ರಗಳನ್ನು ಬರೆದಿದ್ದಾರೆ. ಈ ಸಮಯಕ್ಕೆ ನಾ ಹಿಂದೆ ಹೇಳಿದಂತೆ ಎರಡನೇ ಮಹಾ ಯುದ್ಧ ಆರಂಭವಾಗಿ ಎಲ್ಲೆಲ್ಲೂ ಹಾಹಾಕಾರ ದಾಳಿಗಳು. ಇವಗಳನ್ನು ಕಂಡು ಅಂದಿನ ಸಮಯಕ್ಕೆ ಅವರ ಅನುಭೂತಿ ಏನಿತ್ತು ಎಂಬುದು ಇಂದಿನ ಮತ್ತು ಮುಂದಿನ ಕೆಲವು ಕಗ್ಗಗಳಲ್ಲಿ ಕಾಣಬಹುದು.
What kind of a world is this? Why is this commotion? What wonder is this unabated force? What should be the goal of a man? What is his value? What will be his end? What is the meaning of all these? - Mankutimma
11
ಮುತ್ತಿರುವುದಿಂದು ಭೂಮಿಯನೊಂದು ದುರ್ದೈವ ।
ಮೃತ್ಯು ಕುಣಿಯುತಲಿಹನು ಕೇಕೆಹಾಕುತಲಿ ॥
ಸುತ್ತಿಪುದು ತಲೆಯನನುದಿನದ ಲೋಕದ ವಾರ್ತೆ ।
ಎತ್ತಲಿದಕೆಲ್ಲ ಕಡೆ? - ಮಂಕುತಿಮ್ಮ ॥ ೧೧ ॥
ಭೂಮಿಕೆ ಅದೇ. ಯುದ್ಧ. ಘೋರ ವಿಶ್ವ ಮಹಾ ಯುದ್ಧ. ಇಡೀ ವಿಶ್ವವೇ ಅಲುಗಾಡುವಂಥ ಯುದ್ಧ. ಎಲ್ಲೆಲ್ಲೂ ರಕ್ತಪಾತ. ಎಲ್ಲೆಲ್ಲೂ ಯುದ್ಧದ ಕೂಗು. ಅದು ಈ ಭೂಮಿಗೆ ಆವರಿಸಿಕೊಂಡ ದುರ್ದೈವವೆಂದು ವ್ಯಾಖ್ಯಾನಿಸುತ್ತಾರೆ, ಮಾನ್ಯ ಗುಂಡಪ್ಪನವರು. ಎಲ್ಲೆಲ್ಲೂ ಮೃತ್ಯುವಿನ ತಾಂಡವ. ಯುದ್ಧದಲ್ಲಿ, ತಂದೆಯನ್ನೂ, ಅಣ್ಣನನ್ನೋ, ಮಗನನ್ನೂ, ಮಿತ್ರನನ್ನೋ, ತಮ್ಮನನ್ನೋ, ಭೂಮಿಯನ್ನೋ, ಹುಟ್ಟಿದೂರಲ್ಲಿ ಬಿಟ್ಟ ಬೇರನ್ನೋ, ಆ ಊರಿನ ಮಣ್ಣಿನ ಋಣವನ್ನೋ, ಕಳೆದುಕೊಂಡವರೆ ಬಹಳ ಜನ. ಕಳೆದುಕೊಂಡವರೆಲ್ಲರಿಗೂ ನೋವು. ಕಳೆದುಕೊಳ್ಳದವರಿಗೂ ಕಳೆದುಕೊಂಡವರ ನೋವಿಗಾಗಿ ಸಂತಾಪ. ಒಟ್ಟಾರೆ ಇಡೀ ಭೂಮಿಗೆ ಸೂತಕದ ಭಾವ. ಎಲ್ಲ ಕಡೆಯಿಂದಲೂ ಸಾವಿನ ನಷ್ಟದ ಸಮಾಚಾರ. ಪ್ರತಿನಿತ್ಯ ಈ ಸಮಾಚಾರಗಳನೆಲ್ಲ ಕೇಳಿ ಕೇಳಿ, ಪತ್ರಿಕೆಗಳಲ್ಲಿ ಓದಿ ಓದಿ ತಲೆ ಸುತ್ತುವಂತಾಗುತ್ತದೆ. ಇದಕ್ಕೆಲ್ಲ ಎಂದಿಗಾದರೂ ಕೊನೆಯುಂಟೆ ಎಂದು ಲೋಕ ಶಾಂತಿಗಾಗಿ ಮರುಗುತ್ತಾರೆ ಮಾನ್ಯ ಗುಂಡಪ್ಪನವರು ಈ ಕಗ್ಗದಲ್ಲಿ.
There is a epidemic that has plagued the entire world. Death is dancing laughing at everyone. Everyday worries about the world is keeping the mind busy. Where is the end to all these? - Mankutimma
12
ಮಾನವರೋ ದಾನವರೋ ಭೂಮಾತೆಯ ತಣಿಸೆ ।
ಶೋಣಿತವನೆರೆಯುವರು ಬಾಷ್ಪ ಸಲುವುದಿರೆ? ॥
ಏನು ಹಗೆ! ಏನು ಧಗೆ! ಏನು ಹೊಗೆ! ಯೀ ಧರಣಿ ।
ಸೌನಿಕನ ಕಟ್ಟೆಯೇಂ? - ಮಂಕುತಿಮ್ಮ ॥ ೧೨ ॥
ಇವರೇನು ಮನುಷ್ಯರೋ ಅಥವಾ ರಾಕ್ಷಸರೋ? ಈ ಭೂಮಾತೆಯನು ತಣಿಸಲು ಅಂದರೆ ದಾಹವಿಂಗಿಸಲು ಕಣ್ಣೇರು ಸುರಿಸುವಬದಲು ರಕ್ತವನ್ನು ಸುರಿಸಿಹರಲ್ಲ! ಈ ಪ್ರಪಂಚದಲ್ಲಿನ ಹಗೆ ಮತ್ತು ಹೊಗೆಗಳನ್ನು ನೋಡಿದರೆ ಇಡೀ ಪ್ರಪಂಚವೇ ಕಟುಕನ ಜಗುಲಿಯಂತಿದೆ ಎನ್ನುತ್ತಾರೆ ಮಾನ್ಯ ಗುಂಡಪ್ಪನವರು.
Are these people men or demons? Instead of shedding little tears for the sake of mother earth they soak her in blood. What hatred! What heat (resulting from destruction because of the hatred)! What smoke (after every thing worth saving is burnt)! Is this whole earth a court-place of a tyrrant. - Mankutimma
13
ಪುರುಷಸ್ವತಂತ್ರೆಯ ಪರಮಸಿದ್ಧಿಯದೇನು? ।
ಧರಣಿಗನುದಿನದ ರಕ್ತಾಭಿಷೇಚನೆಯೆ? ॥
ಕರವಾಲವನು ಪುಷ್ಪಸರವೆಂದು ಸೆಳೆದಾಡೆ ।
ಪರಿಮಳವ ಸೂಸುವುದೆ? - ಮಂಕುತಿಮ್ಮ ॥ ೧೩ ॥
ಆಗ ನಡೆಯುತ್ತಿದ್ದ ಯುದ್ದ, ಯುದ್ದದಿಂದ ಆಗುತ್ತಿದ್ದ ದುಷ್ಪರಿಣಾಮಗಳು, ಇವುಗಳ ಬಗ್ಗೆ ಮನಕರಗಿ ಭಾವುಕರಾದ ಮಾನ್ಯ ಗುಂಡಪ್ಪನವರು ಶಕ್ತಿಯ ಸ್ವಾತಂತ್ರದ ಸರ್ವೋಚ್ಚ ಗುರಿ, ಈ ಭೂಮಿಗೆ ಪ್ರತಿದಿನವೂ ರಕ್ತದ ಅಭಿಷೇಕವೇ, ಒರೆಯಿಂದ ಕತ್ತಿಯನ್ನು ಹೂವಿನ ಮಾಲೆ ಎಂದು ಎಳೆದರೆ ಅದರಿಂದ ಸುಗಂಧ ಬರಬಹುದೇ ಎನ್ನುತ್ತಾರೆ.
What is the greatest achievement of human free will? Is it the everyday blood shed on this earth? If you catch hold of a sword and pull it as if it were garland of flowers will it give out fragrance. - Mankutimma